ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಪರಿಸರ ಸ್ನೇಹಿ ಗಣೇಶ ಹಬ್ಬ (eco freindly ganesh festival) ಆಚರಣೆ ಮಾಡುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (KSPCB) ಹಲವು ಸೂಚನೆಗಳನ್ನು ನೀಡಿದೆ.
ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ 2016ರಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದ್ದಾರೆ.
READ | ಗಣೇಶ ಚತುರ್ಥಿ ಹಿನ್ನೆಲೆ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ವೇಳಾಪಟ್ಟಿ
ಜಿಲ್ಲಾಧಿಕಾರಿ ನೀಡಿರುವ ಸೂಚನೆಗಳೇನು?
- ಪ್ಲಾಸ್ಟರ್ ಆಫ್ ಪ್ಯಾರಿಸ್ ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ರಾಜ್ಯದ ಯಾವುದೇ ಜಲಮೂಲಗಳಲ್ಲಿ ಪಿಓಪಿ ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಐ.ಪಿ.ಸಿ. ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.
- ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ನಂತರ ಗೌರಿ ಗಣೇಶ ಮೂರ್ತಿಗಳನ್ನು ನಗರ ಸಭೆ/ ಪುರಸಭೆ ವತಿಯಿಂದ ನಿಗದಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಗ್ರಹಗಳನ್ನು ವಿಸರ್ಜಿಸುವುದು.
- ಗೌರಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಮಹಾನಗರ ಪಾಲಿಕೆ/ನಗರ ಸಭೆ/ ಪುರಸಭೆ/ ಪಂಚಾಯಿತಿ ಕಸ ಸಂಗ್ರಹಣ ವಾಹನಕ್ಕೆ ನೀಡುವುದು.
- ಸಾರ್ವಜನಿಕವಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸಿದೆ.
- ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು.