ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಗುಣಮಟ್ಟದ ಶಿಕ್ಷಣಕ್ಕೆ ಮುಂದಿನ ವರ್ಷದಲ್ಲಿ ರಾಜ್ಯದಲ್ಲಿ 500 ರಿಂದ 600 ಕೆಪಿಎಸ್ ಶಾಲೆಗಳನ್ನು ತೆರೆಯಲು ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ ಪ್ರೌಢಶಾಲೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಬದಲಾದ ಪರೀಕ್ಷಾ ಪದ್ಧತಿ ಕುರಿತಾದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಬಾರಿ 43 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದು, 13 ಸಾವಿರ ಕಾಯಂ ಶಿಕ್ಷಕರನ್ನು ನೇಮಕ ಮಾಡಲಾಗಿದ್ದು, ಶಾಲೆಗಳಲ್ಲಿನ ಸಮಸ್ಯೆ ಪರಿಹಾರಕ್ಕೆ ನಿಮ್ಮ ಸಹಕಾರ ನನಗೆ ಅಗತ್ಯ ಎಂದು ಹೇಳಿದರು.
ಮೂರು ಪರೀಕ್ಷೆ ಬರೆಯಲು ಅವಕಾಶ
ಶಿಕ್ಷಣ ಮಂಡಳಿಯು ಮಕ್ಕಳಿಗೆ ಅವಕಾಶಗಳನ್ನು ನೀಡುವ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯನ್ನು ಮೂರು ಪ್ರಯತ್ನಗಳಲ್ಲಿ ನಡೆಸಲು ತೀರ್ಮಾನಿಸಿದೆ. ಒಂದೇ ಬಾರಿ ಮಾತ್ರ ಪರೀಕ್ಷಾ ಶುಲ್ಕವನ್ನು ಪಾವತಿಸಿ 3 ಅವಕಾಶಗಳೊಂದಿಗೆ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಮೊದಲ ಪರೀಕ್ಷೆಯಲ್ಲಿಯೇ ಉತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಎರಡು ಅವಕಾಶಗಳನ್ನು ಉಪಯೋಗಿಸಿಕೊಳ್ಳುವುದು ಅವರ ಐಚ್ಛಿಕ ವಿಷಯ. ಮೂರು ಪರೀಕ್ಷೆಗಳಲ್ಲಿ ಯಾವ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದಿರುತ್ತಾರೋ ಆ ಅಂಕವನ್ನು ಪರಿಗಣಿಸಲಾಗುತ್ತದೆ. ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
22 ಸಾವಿರದಲ್ಲಿ 4 ಸಾವಿರ ಎವರೇಜ್ ಗಿಂತ ಕಡಿಮೆ
ಡಿಡಿಪಿಐ ಸಿ.ಆರ್.ಪರಮೇಶ್ ಮಾತನಾಡಿ, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಈ ಸಲ 22 ಸಾವಿರ ವಿದ್ಯಾರ್ಥಿಗಳ ಪೈಕಿ ನಾಲ್ಕು ಸಾವಿರ ವಿದ್ಯಾರ್ಥಿಗಳು ಸರಾಸರಿಗಿಂತ ಕಡಿಮೆ ಇದ್ದಾರೆ. ಅಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ವಿಷಯವಾರು ಸಂಬಂಧಪಟ್ಟ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕು. ಎಲ್ಲ ವಿಷಯವಾರು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಹಾಜರಾತಿ ಬಹಳ ಮುಖ್ಯ. ಶಿಕ್ಷಕರು ಪೋಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಸ್ಥಳೀಯ ಪರಿಸ್ಥಿತಿಯನ್ನು ಮನಗಂಡು ಪರೀಕ್ಷೆಗೆ ಬೇಕಾದ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
ಪರೀಕ್ಷೆಯಲ್ಲಿ ಏನೇನು ಬದಲಾವಣೆಗಳು
ವಿಶೇಷ ಉಪನ್ಯಾಸಕ ಹರಿಪ್ರಸಾದ್ ಮಾತನಾಡಿ, ಬದಲಾದ ಪರೀಕ್ಷಾ ಪದ್ಧತಿಯಲ್ಲಿ ವೈಭವೀಕರಣಕ್ಕೆ ಕಡಿವಾಣ ಹೇರಲಾಗಿದೆ. ಮಕ್ಕಳ ಮೇಲಿನ ಒತ್ತಡವನ್ನು ನಿವಾರಣೆ ಮಾಡಬೇಕು ಮತ್ತು ಪರೀಕ್ಷೆಯನ್ನು ಸುಲಲಿತವಾಗಿ ಮಾಡಬೇಕು. ಇವುಗಳು ಬದಲಾದ ಪರೀಕ್ಷಾ ಪದ್ಧತಿಯ ಆಶಯಗಳು ಇವುಗಳನ್ನು ತಿಳಿಯುವುದು ಉತ್ತಮ. ಯಾವುದೇ ಪರೀಕ್ಷೆ ನಡೆಯುವಾಗ ಅದಕ್ಕೆ ಸಂಬಂಧ ಪಟ್ಟ ಬ್ಲ್ಯೂಪ್ರಿಂಟ್ ಮತ್ತು ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಳಿಯು ತನ್ನ ವೆಬ್ ಸೈಟ್ ನಲ್ಲಿ ಅಪ್ಲೋಡ್ ಮಾಡುತ್ತದೆ. ಶಿಕ್ಷಕರು ಅದನ್ನು ಗಮನಿಸಿ ಮಕ್ಕಳಿಗೆ ಸರಿಯಾದ ಕ್ರಮದಲ್ಲಿ ತಿಳಿಸಬೇಕು. ಮಕ್ಕಳು ಒಂದು ವಿಷಯದ ಆಳದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಶೇ.75 ಹಾಜರಾತಿಯನ್ನು ಹೊಂದಿರಬೇಕು ಎಂದು ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಅಧ್ಯಾಪಕ ಚಂದ್ರಕಾಂತ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಕೃಷ್ಣಪ್ಪ, ಗ್ಲೋಬಲ್ ಎಜುಕೇಶನ್ ಸೊಸೈಟಿಯ ರಮೇಶ್, ಡಯೆಟ್ ಪ್ರಾಂಶುಪಾಲರಾದ ಬಸವರಾಜಪ್ಪ, ಕಲಗೋಡು ರತ್ನಾಕರ್ ಮತ್ತಿತರರು ಉಪಸ್ಥತರಿದ್ದರು.