ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ವಿಮಾನ ನಿಲ್ದಾಣ ಹಾಗೂ ರೈಲು ನಿಲ್ದಾಣಕ್ಕೆ ನಾಮಕರಣದ ದಿನ ಸನ್ನಿಹಿಸಿದೆ. ಈ ಕುರಿತು ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ (B.Y. Raghavendra) ಅವರು ಪ್ರಮುಖ ಮಾಹಿತಿಯನ್ನು ಮಾಧ್ಯಮದವರೊಂದಿಗೆ ಹಂಚಿಕೊಂಡಿದ್ದಾರೆ.
ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು, ಡಿಸೆಂಬರ್ ಅಂತ್ಯದೊಳಗೆ (15 ದಿನಗಳಲ್ಲಿ) ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು (kuvempu) ಹಾಗೂ ರೈಲು ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕ (Keladi shivappa nayak) ಹೆಸರು ಅಧಿಕೃತಗೊಳ್ಳಲಿದೆ ಎಂದು ತಿಳಿಸಿದರು.
ಈಗಾಗಲೇ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಸಂಬಂಧ ಅಧಿವೇಶನದಲ್ಲಿ ತೀರ್ಮಾನಿಸಲಾಗಿದ್ದು, ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದೇನು?
- ವಿಮಾನ ನಿಲ್ದಾಣ ಕಾರ್ಯಾಚರಣೆ ಶುರುವಾದಾಗಿನಿಂದ ನೈಟ್ ಲ್ಯಾಂಡಿಂಗ್ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಲೇ ಇದೆ. ಅದಕ್ಕಾಗಿ ಅಗತ್ಯವಿರುವ ಹೆಚ್ಚುವರಿ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಕಾಮಗಾರಿ ಮಾಡಲಾಗುತ್ತಿದೆ. ಜನವರಿ 15ರೊಳಗೆ ನೈಟ್ ಲ್ಯಾಂಡಿಂಗ್ ಕೂಡ ಆರಂಭವಾಗಲಿದೆ ಎಂದು ಹೇಳಿದರು.
- ಶಿವಮೊಗ್ಗ ವಿಮಾನ ನಿಲ್ದಾಣವನ್ನು ಅಂತರ ರಾಷ್ಟ್ರೀಯ ದರ್ಜೆಗೇರಿಸಲು ಎಲ್ಲ ಹಂತಗಳಲ್ಲಿ ಪ್ರಯತ್ನಿಸಲಾಗುತ್ತಿದೆ. ಅದಕ್ಕಾಗಿ ಇರುವ ತೊಡಕುಗಳಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಪ್ರಸ್ತುತ ಶಿವಮೊಗ್ಗದಿಂದ ಬೆಂಗಳೂರು ಸೇರಿದಂತೆ ಹೈದ್ರಾಬಾದ್, ಗೋವಾ, ತಿರುಪತಿಗೆ ವಿಮಾನ ಹಾರಾಟ ಆರಂಭವಾಗಿದೆ.
- ಮಂಜು ಆವರಿಸಿದಾಗ ವಿಮಾನ ಲ್ಯಾಂಡಿಂಗ್ ಮಾಡಲು ಶಿವಮೊಗ್ಗದಲ್ಲಿ ತೊಂದರೆ ಆಗುತ್ತಿದೆ. ಈ ಕುರಿತು ಕೇಂದ್ರದ ಗಮನ ಸೆಳೆಯಲಾಗಿದೆ. ಎಲ್ಲ ರೀತಿಯ ಸಹಕಾರ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ. ಶೀಘ್ರವೇ ಈ ಸಮಸ್ಯೆಗೂ ಪರಿಹಾರ ಸಿಗಲಿದೆ.
ಮಾಧ್ಯಮಗೋಷ್ಠಿಯಲ್ಲಿ ಶಾಸಕ ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರಾಧ್ಯಕ್ಷ ಜಗದೀಶ್, ಅಣ್ಣಪ್ಪ ಇತರರು ಉಪಸ್ಥಿತರಿದ್ದರು.