ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮುಂದಿನ ದಿನದಲ್ಲಿ ಎಲ್ಲ ವರ್ಗದವರಿಗೆ 25 ವರ್ಷದ ಮಿತಿಯೊಳಗೆ ಅರಣ್ಯ ಹಕ್ಕು ನೀಡಲು ಸರ್ಕಾರ ಬದ್ದವಾಗಿದೆ. ಅಧಿಕಾರಿಗಳು ಬಡವರನ್ನು ಒಕ್ಕಲೆಬ್ಬಿಸಬಾರದು. ಶರಾವತಿ ಸಂತ್ರಸ್ತರ ರಕ್ಷಣೆ ಬಗ್ಗೆ ನಮ್ಮ ಬದ್ದತೆ ಇದ್ದು ಬಡತನ ನಿರ್ಮೂಲನೆ ನಮ್ಮ ಯುದ್ದವಾಗಿದೆ ಎಂದು ಉಒ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉಳುವವನೆ ಭೂಮಿ ಒಡೆಯ ಹಕ್ಕು ವಿಚಾರ ನಿರ್ವಹಿಸಲಾಗುತ್ತಿದೆ. ಜಿಲ್ಲಾ ತಾಲ್ಲೂಕು ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಸೌಲಭ್ಯಗಳನ್ನು ನೀಡಲು ಮನೆ ಬಾಗಿಲಿಗೆ ನಮ್ಮ ಸರ್ಕಾರ ಬಂದಿದೆ. ಸದುಪಯೋಗ ಪಡೆಯಿರಿ. ಎಲ್ಲ ವರ್ಗಗಳಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದಿದೆ ಎಂದ ಅವರು ಇದೇ ಸಂದರ್ಭದಲ್ಲಿ ಅವರು ಅಲ್ಲಮಪ್ರಭು ವಚನಗಳನ್ನು ಸ್ಮರಿಸಿದರು.
READ | ಶಿವಮೊಗ್ಗದಲ್ಲಿ ಮತ್ತೆ ಮಂಗನ ಕಾಯಿಲೆ ಪಾಸಿಟಿವ್, ಇದುವರೆಗೆ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು ತಗುಲಿದೆ?
ಜಾತಿ ಅಲ್ಲ ನೀತಿ ಆಧಾರದ ಮೇಲೆ ಗ್ಯಾರಂಟಿ
ಜಾತಿಯ ಆಧಾರದಲ್ಲಿ ಅಲ್ಲ. ಬದಲಾಗಿ ನೀತಿಯ ಆಧಾರದಲ್ಲಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಚುನಾವಣಾ ಪೂರ್ವ ಸಮಿತಿಯನ್ನು ರಚಿಸಿ, ಗ್ಯಾರಂಟಿ ಕಾರ್ಡುಗಳನ್ನು ಮನೆ ಮನೆಗಳಿಗೆ ತಲುಪಿಸಿದಂತೆ ಸರ್ಕಾರ ರಚನೆಯಾದ ತಕ್ಷಣ ಯೋಜನೆಗಳನ್ನು ಜಾರಿ ಮಾಡಿ ನಡೆದಂತೆ ನುಡಿದಿದ್ದೇವೆ ಎಂದರು.
ವಿವಿಧ ಯೋಜನೆ ಅಡಿ ಎಷ್ಟು ಜನರಿಗೆ ಲಾಭ?
ಗೃಹಲಕ್ಷ್ಮಿ ಯೋಜನೆಯನ್ನು ಬೆಳಗಾವಿಯಲ್ಲಿ ಚಾಲನೆ ನೀಡಿ, ಇದುವರೆಗೆ 1 ಕೋಟಿ 10 ಲಕ್ಷ, ಮಹಿಳೆಯರಿಗೆ ₹2000 ಭತ್ಯೆ ನೀಡಲಾಗಿದ್ದು ರಾಷ್ಟ್ರದಲ್ಲೆ ಇದೊಂದು ಇತಿಹಾಸ. ಗೃಹಜ್ಯೋತಿ ಯೋಜನೆಯಡಿ ಇದುವರೆಗೆ 1.5 ಕೋಟಿ ಜನರಿಗೆ ಉಚಿತ 200 ಯುನಿಟ್ ವಿದ್ಯುತ್ ನೀಡಲಾಗಿದೆ. ಅನ್ನ ಭಾಗ್ಯ ಯೋಜನೆಯಡಿ 5 ಕೆ ಜಿ ಜೊತೆ ಇನ್ನುಳಿದ ಐದು ಕೆಜಿ ಅಕ್ಕಿ ಬದಲು ಪ್ರತಿ ಸದಸ್ಯರಿಗೆ ಒಂದು ಕೆಜಿಗೆ ರೂ.34 ರಂತೆ ನೀಡಲಾಗುತ್ತಿದೆ. ಪ್ರಸ್ತುತ ಬೆಲೆ ಏರಿಕೆ ಸಂಕಷ್ಟದಲ್ಲಿ ಸರ್ಕಾರ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿಗೊಳಿಸಿದೆ. ಹಾಗೂ ಪ್ರಸ್ತುತ ಹೊಸದಾಗಿ 1000 ಬಸ್ ಖರೀದಿ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳಿಗಾಗಿ ಈ ಬಜೆಟ್ ನಲ್ಲಿ 50 ಸಾವಿರ ಕೊಟಿ ಮೀಸಲು ಇಡಲಾಗಿದೆ ಎಂದರು.
ಗುಣಮಟ್ಟ ಹೆಚ್ಚಿಸಲು ಕೆಪಿಎಸ್, ಸಿಎಸ್ ಆರ್ ಮಾದರಿ ಶಾಲೆ
ಶಿಕ್ಷಣದಲ್ಲಿ ಗುಣಮಟ್ಟ ತರಲು, ರೈತರು, ಕಾರ್ಮಿಕರು, ಶಿಕ್ಷಕರು ಹಾಗೂ ಎಲ್ಲ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸರ್ಕಾರದ ಹಂತದಲ್ಲಿ ಸಮಿತಿ ರಚಿಸಿ ಕೋಟಿಗೂ ಹೆಚ್ಚು ಬಂಡವಾಳ ಹಾಕಿ ಕೆಪಿಎಸ್, ಸಿಎಸ್ ಆರ್ ಮಾದರಿ ಶಾಲೆಗಳನ್ನು ತೆರೆಯುವ ಯೋಜನೆ ಮೂಲಕ ದೊಡ್ಡ ನಗರದಲ್ಲಿ ದೊರೆಯುವಂತಹ ಶಿಕ್ಷಣ ಹಳ್ಳಿಮಕ್ಕಳಿಗೂ ಸಿಗವಂತಹ ಕಾರ್ಯಕ್ರಮ ರೂಪಿಸಿದ್ದೇವೆ. ಯುವನಿಧಿ ಯೋಜನೆ ಮೂಲಕ ಪದವಿ ಪೂರ್ಣಗೊಳಿಸಿದವರಿಗೆ ರೂ.3 ಸಾವಿರ ಹಾಗೂ ಡಿಪ್ಲೊಮಾದಾರರಿಗೆ ₹1500 ನೀಡುವ ಮೂಲಕ ಯುವಜನರಿಗೆ ಆಶಾಕಿರಣವಾಗಿದ್ದು ಐದು ಗ್ಯಾರಂಟಿ ಯೋಜನೆಗಳು ಜನರಲ್ಲಿ ಶಕ್ತಿ ತುಂಬಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಮಾತನಾಡಿದರು. ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮಾತನಾಡಿ,
ನೀಡಿದ ಭರವಸೆಯನ್ನು ಸರ್ಕಾರ ಸಾಕಾರಗೊಳಿಸಿದೆ. ಎಲ್ಲರೂ ಐದು ಯೋಜನೆಗಳ ಉಪಯೋಗ ಪಡೆಯಿರಿ ಎಂದ ಅವರು ಜಿಲ್ಲೆಯ ಶರಾವತಿ ಸಂತ್ರಸ್ತರು, ಶುಗರ್ ಫ್ಯಾಕ್ಟರಿ, ರೈತರ ಸಮಸ್ಯೆಗಳನ್ನು ಬಗೆಹರಿಸಿ.
– ಶಾರದಾ ಪೂರ್ಯಾನಾಯ್ಕ, ಶಾಸಕಿ
ಸರ್ಕಾರದ ವಿವಿಧ ಯೋಜನೆಗಳ ಮಳಿಗೆಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ , ಸದುಪಯೋಗ ಪಡೆದುಕೊಂಡರು. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳ ಫಲಾನುಭವಿಗಳು ಪಾಲ್ಗೊಂಡು ತೆರೆಯಲಾದ ಯೋಜನೆಗಳ ಸೌಲಭ್ಯವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಹತ್ತು ಹೊಸ ಕೆಎಸ್ಆರ್.ಟಿಸಿಟಿಸಿ ಬಸ್ ಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ಅಲ್ಲಮಪ್ರಭು ಮೈದಾನದಲ್ಲಿ ಬರೆಸಲಾಗಿರುವ ಅಲ್ಲಮಪ್ರಭು ವಚನಗಳನ್ನು ವೀಕ್ಷಿಸಿದರು. ವೇದಿಕೆ ಮುಂಭಾಗದಲ್ಲಿ ಸಿರಿಧಾನ್ಯಗಳಲ್ಲಿ ‘ಅರಿವೇ ಗುರು ಅಲ್ಲಮ ಪ್ರಭು’ ಅಲಂಕಾರ ವಿಶೇಷ ಆಕರ್ಷಣೆಯಾಗಿತ್ತು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ ಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿ ಇನ್ನಿತರರು ಉಪಸ್ಥಿತರಿದ್ದರು.
Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ