ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಲೋಕಸಭಾ ಚುನಾವಣೆಯ (Shivamogga lokasabha election 2024) ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಶನುವಾರ ಬೆಳಗಿನ ಜಾವ ರೌಡಿಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ (GK Mithun Kumar) ಮಾರ್ಗದರ್ಶನದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡುವೈಎಸ್.ಪಿ ಬಾಬು ಆಂಜನಪ್ಪ, ಬಿ ಉಪ ವಿಭಾಗದ ಡಿವೈಎಸ್.ಪಿ ಎಂ.ಸುರೇಶ್, ಭದ್ರಾವತಿ ಉಪ ವಿಭಾಗದ ಡಿವೈಎಸ್.ಪಿ ನಾಗರಾಜ್, ಸಾಗರ ಉಪ ವಿಭಾಗದ ಡಿವೈಎಸ್.ಪಿ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್, ಶಿಕಾರಿಪುರ ಉಪ ವಿಭಾಗದ ಡಿವೈಎಸ್.ಪಿ ಕೇಶವ್, ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್.ಪಿ ಗಜಾನನ ವಾಮನ ಸುತಾರ ಹಾಗೂ ಆಯಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು, ಸಿಬ್ಬಂದಿಯನ್ನೊಳಗೊಂಡ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ರೌಡಿಗಳ ಮನೆ ಮೇಲೆ ದಾಳಿ ಮಾಡಿವೆ.
ರೌಡಿಗಳ ಪೂರ್ಣ ಮಾಹಿತಿ ಕಲೆ ಹಾಕಿದ ಪೊಲೀಸ್
ತಪಾಸಣೆ ನಡೆಸಿ ರೌಡಿ ಆಸಾಮಿಗಳ ಹಾಜರಾತಿ, ಹಾಲಿ ಮಾಡುತ್ತಿರುವ ಕೆಲಸ, ಮನೆಯಲ್ಲಿ ಮಾದಕ ವಸ್ತು ಹಾಗೂ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಬಗ್ಗೆ ಪರಿಶೀಲಿಸಿ, ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಮತ್ತು ಶಾಂತಿಗೆ ಭಂಗವನ್ನುಂಟು ಮಾಡುವಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಸೂಕ್ತ ಎಚ್ಚರಿಕೆ ನೀಡಲಾಯಿತು.