ಸುದ್ದಿಕಣಜ.ಕಾಂ
ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರದ ಸಚಿವರಿಗೆ ಮಂಗಳವಾರ ಮನವಿ ಮಾಡಿದರು.
ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಕುರುಬ ಸಮಾಜಕ್ಕೆ ಎಸ್.ಟಿ. ಪಟ್ಟಿಗೆ ಸೇರಿಸುವ ಅಗತ್ಯತೆಯ ಬಗ್ಗೆ ಗಮನ ಸೆಳೆದರು. ಜತೆಗೆ, ಸಮಾಜದ ಇತಿಹಾಸವನ್ನು ಮನವರಿಕೆ ಮಾಡಿಕೊಟ್ಟರು.
ಶ್ರೀಮಠ ಕಾಗಿನೆಲೆ ಕನಕಗುರುಪೀಠ ಶ್ರೀ ಜಗದ್ಗುರು ನಿರಂಜನಾನಂದಪುರಿ ಮಹಾಸ್ವಾಮೀಜಿ, ಹೊಸದುರ್ಗ ಕಾಗಿನೆಲೆ ಕನಕಗುರುಪೀಠ ಶಾಖಾಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮೀಜಿ, ಶ್ರೀ ಶಿವಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ ಸಾನ್ನಿಧ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಕೇಂದ್ರ ಸರ್ಕಾರದ ಸಮಾಜ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಮತ್ತು ಹಿರಿಯ ನಾಯಕರುಗಳನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದು ಈಶ್ವರಪ್ಪ ತಿಳಿಸಿದರು.
ಮಾಜಿ ಸಚಿವ ಮತ್ತು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ಬಂಡೆಪ್ಪ ಕಾಶಂಪೂರ್, ಹೋರಾಟ ಸಮಿತಿ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಕಾರ್ಯಾಧ್ಯಕ್ಷ ಕೆ.ಮುಕುಡಪ್ಪ, ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಡಿ ವೆಂಕಟೇಶಮೂರ್ತಿ, ಸಮಿತಿ ಖಜಾಂಚಿ ಕೆ.ಈ. ಕಾಂತೇಶ, ಟಿ.ಬಿ.ಬಳಗಾವಿ, ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ಆನೇಕಲ್ ದೊಡ್ಡಯ್ಯ, ಸಂತೋಷ್ ಭಾಗವಹಿಸಿದ್ದರು.