ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮುಂಗಾರು (Monsoon) ಆರಂಭವಾಗುವ ಹಂತದಲ್ಲಿರುವುದರಿಂದ ಶಿವಮೊಗ್ಗ ಜಿಲ್ಲೆಯ ಮಲೆನಾಡು ಪ್ರದೇಶ (Malendu Region) ಗಳಲ್ಲಿ ಮಳೆಯ ತೀವ್ರತೆ ಹೆಚ್ಚಾದಲ್ಲಿ ಎಲೆಚುಕ್ಕೆ ರೋಗ (areca palm leaf spot daisies) ಉಲ್ಭಣವಾಗುವ ಸಂಭವವಿರುತ್ತದೆ. ಆದುದರಿಂದ ಈ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ರೈತರು (Farmers) ಈ ಕೆಳಕಂಡ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲು ಕೋರಿದೆ.
READ | ಅಡಿಕೆ ಎಲೆಚುಕ್ಕೆ ರೋಗ ಅಧ್ಯಯನಕ್ಕೆ ಏಳು ಜನ ತಜ್ಞರ ಕೇಂದ್ರ ಸಮಿತಿ ನಿಯೋಜನೆ, ಭೇಟಿ ನೀಡಲಿದೆ ತಂಡ
ಎಲೆಚುಕ್ಕೆ ರೋಗ ನಿರ್ವಹಣೆ ಕ್ರಮಗಳೇನು?
- ಅಡಿಕೆ ತೋಟ(areca farms)ಗಳಲ್ಲಿ ಕಳೆದ ಬಾರಿಯ ರೋಗಬಾಧಿತ ಒಣಗಿರುವ ಮತ್ತು ಹಳದಿಯಾಗಿರುವ ಗರಿಗಳನ್ನು ತೆಗೆದು ರಾಶಿ ಹಾಕಿ ಸುಡುವುದರಿಂದ ಸೋಂಕು ಕಡಿಮೆಗೊಳಿಸಲು ಪ್ರಯೋಜನಕಾರಿ.
- ಮುಂಗಾರು ಪ್ರಾರಂಭದಲ್ಲಿ ಅಡಿಕೆ ಗೊನೆಗಳಿಗೆ ಬೋರ್ಡೋ ಮಿಶ್ರಣ ಸಿಂಪಡಣೆ ಮಾಡುವಾಗ ಎಲೆಗಳಿಗೂ ಸಿಂಪರಣೆ ಮಾಡಬೇಕು.
- ಹೆಚ್ಚು ಬಾಧೆಯಿರುವ ತೋಟಗಳಲ್ಲಿ ಆಗಸ್ಟ್- ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಇಲ್ಲದಾಗ ಪ್ರೋಪಿಕೋನಝೋಲ್ (Propiconazole 25, EC) ಶಿಲೀಂದ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿ ಲೀಟರ್ ಪ್ರಮಾಣದಂತೆ ಎಲೆಗಳಿಗೆ ಸಿಂಪಡಣೆ ಮಾಡಬೇಕು.
- ಎರಡನೇ ಸಿಂಪಡಣೆಗೆ ಕಾರ್ಬರ್ಬೆನ್ಡಜಿಮ್ 12% + ಮ್ಯಾಂಕೋಜೆಟ್ 63% + (ಒಂದು ಲೀಟರ್ ನೀರಿಗೆ ಎರಡು ಗ್ರಾಂ) ಅಥವಾ ಅಂರ್ತವ್ಯಾಪಿ ಶಿಲೀಂದ್ರನಾಶಕಗಳಾದ ಹೆಕ್ಸಾಕೊನಝೋಲ್ (Hexaconazole 5 %) ಅಥವಾ ಟೆಬುಕೊನಝೋಲ್ (Tebuconazole, 38.9 %) ಶಿಲೀಂಧ್ರನಾಶಕವನ್ನು ಒಂದು ಲೀಟರ್ ನೀರಿಗೆ ಒಂದು ಮಿಲಿ ಲೀಟರ್ ಪ್ರಮಾಣದಂತೆ ಬಳಸಬಹುದು.
- ಮಣ್ಣು ಪರೀಕ್ಷೆ ಆಧಾರದ ಮೇಲೆ ಗೊಬ್ಬರ ನೀಡುವುದು ಉತ್ತಮ. ಸಾಮಾನ್ಯವಾಗಿ, ಅಡಿಕೆ ಮರಕ್ಕೆ 12 ಕಿಲೋಗ್ರಾಂ ಹಟ್ಟಿಗೊಬ್ಬರ ಮತ್ತು ಹಸಿರೆಲೆ, ಯೂರಿಯ (220 ಗ್ರಾಂ), ರಾಕ್ ಫಾಸ್ಫೇಟ್ (200 ಗ್ರಾಂ) ಮತ್ತು ಪೋಟಾಷ್ (240-350 ಗ್ರಾಂ) ನೀಡಬೇಕು.
- ರಸಗೊಬ್ಬರಗಳನ್ನು ಕನಿಷ್ಠ ಎರಡು ಕಂತುಗಳಲ್ಲಿ ನೀಡಬೇಕು. ಜೊತೆಗೆ ಲಘುಪೋಷಕಾಂಶಗಳಾದ ಸತುವಿನ ಸಲ್ಫೇಟ್ (5 ಗ್ರಾಂ) ಮತ್ತು ಬೊರಾಕ್ಸ್ (5 ಗ್ರಾಂ) ಕೂಡ ನೀಡಬಹುದು. ಗಾಳಿಯಲ್ಲಿ ರೋಗಾಣು ಬಹಳ ಬೇಗನೆ ಹರಡುತ್ತದೆ. ಹಾಗಾಗಿ ರೋಗ ಪೀಡಿತ ಅಡಿಕೆ ಸಸಿಗಳನ್ನು ರೋಗವಿಲ್ಲದ ಪ್ರದೇಶಕ್ಕೆ ಸಾಗಿಸದಿರುವುದು ಮತ್ತು ಸಮುದಾಯ ಮಟ್ಟದ ರೋಗ ನಿಯಂತ್ರಣ ಬಹು ಮುಖ್ಯವಾಗುತ್ತವೆ.
ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ
ಹೆಚ್ಚಿನ ಮಾಹಿತಿಗಾಗಿ, ರೈತರುಗಳು ಆಯಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಅಥವಾ ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿಯ ಪಡೆಯಬಹುದಾಗಿದೆ.
ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕೆ ರೋಗ ಬಾಧೆ, ಭಯ ಬೇಡ, ತಜ್ಞರೇನು ಹೇಳುತ್ತಾರೆ, ನಿರ್ವಹಣೆ ಏನು?