ಸುದ್ದಿ ಕಣಜ.ಕಾಂ
ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸುವ ನಿರಂತರ ಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯಲ್ಲಿ ಅವ್ಯವಹಾರ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರಂತರ ಜ್ಯೋತಿ ಯೋಜನೆ ಅನುಷ್ಠಾನ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ ಹಣ ಅಂದರೆ ಅಧಿಕಾರಿಗಳಿಗೆ ಹಬ್ಬವಾಗಿದೆ.ಸರ್ಕಾರ ಹಣ ಪೋಲಾಗುವುದಕ್ಕೆ ಬಿಡಲ್ಲ. ಕೂಡಲೇ ಗುತ್ತಿಗೆದಾರರ ಬಿಲ್ ತಡೆ ಹಿಡಿದು ಎಲ್ಲೆಲ್ಲಿ ಅವ್ಯವಹಾರವಾಗಿದೆ ಎಂದು ಮುಂದಿನ ಸಭೆಯಲ್ಲಿ ವರದಿ ನೀಡಿ.
– ಕೆ.ಎಸ್ ಈಶ್ವರಪ್ಪ,ಸಚಿವರು
ಗುತ್ತಿಗೆದಾರರು ಕಾರ್ಮಿಕರಿಗೆ ಪಿಎಫ್ ಹಣ ಕೊಟ್ಟಿಲ್ಲ. ಈ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಶೀಘ್ರದಲ್ಲೇ ಅಧಿಕಾರಿಗಳು ಗುತ್ತಿಗೆದಾರನಿಂದ ಕಾರ್ಮಿಕರಿಗೆ ಪಿಎಫ್ ಹಣ ಕೊಡಿಸಬೇಕು. ಇಲ್ಲವಾದ್ದಲ್ಲಿ ಅಧಿಕಾರಿಗಳ ಮೇಲೆಯೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಬೇಕಾಗುತ್ತದೆ.
– ಆಯನೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ
ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ 68ಫೀಡರ್ ಗಳ ಬಲವರ್ಧನೆಗೆ ಮಂಜೂರಾತಿ ದೊರೆತು ಕಾಮಗಾರಿ ಪ್ರಗತಿಯಲ್ಲಿದೆ. ಇದುವರೆಗೆ ಶಿವಮೊಗ್ಗ ವಿಭಾಗದಲ್ಲಿ 17 ಫೀಡರ್ ಗಳ ಪೈಕಿ 10, ಭದ್ರಾವತಿಯಲ್ಲಿ 18 ಫೀಡರ್ಗಳ ಪೈಕಿ 14, ಸಾಗರದಲ್ಲಿ 9ಫೀಡರ್ಗಳ ಪೈಕಿ 5 ಮತ್ತು ಶಿಕಾರಿಪುರದಲ್ಲಿ 24 ಫೀಡರ್ಗಳ ಪೈಕಿ 23 ಕಾಮಗಾರಿಗಳು ಪೂರ್ಣಗೊಂಡು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.
ಶಿವಮೊಗ್ಗದಲ್ಲಿ ಬಾಕಿ ಉಳಿದಿರುವ 7 ಕಾಮಗಾರಿಗಳ ಪೈಕಿ 4 ಕಾಮಗಾರಿ ಈ ತಿಂಗಳ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿವೆ. ಒಟ್ಟು ಯೋಜನೆಯ ವೆಚ್ಚ 226 ಕೋಟಿ ರೂಪಾಯಿ ಪೈಕಿ 148 ಕೋಟಿ ರೂ. ಪಾವತಿ ಮಾಡಲಾಗಿದೆ ಎಂದು ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ವೀರೇಂದ್ರ ಮಾಹಿತಿ ನೀಡಿದರು.
ಟಿಸಿ ಬಗ್ಗೆಯೂ ಮಾಹಿತಿ ಒದಗಿಸಿ: ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು. ಅಳವಡಿಸುವ ವಿದ್ಯುತ್ ಕಂಬಗಳು ಮಾತ್ರವಲ್ಲದೆ ಟ್ರಾನ್ಸ್ಫಾರ್ಮರ್ ಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಒದಗಿಸಬೇಕು. ವಿದ್ಯುತ್ ಅಘಾತದಿಂದ ಸಾವಿಗೀಡಾಗುವವರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಮಾರ್ಗಸೂಚಿ ಪ್ರಕಾರ ಪ್ರಧಾನ ಮಂತ್ರಿ ಅವರು ಭಾವಚಿತ್ರವನ್ನು ಜಾಹೀರಾತಿನಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ತಿಳಿಸಿದರು.
ಶಾಸಕ ಅಶೋಕ್ ನಾಯ್ಕ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.