ಸುದ್ದಿ ಕಣಜ.ಕಾಂ ಸಾಗರ
SAGARA: ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಜಲಪಾತವನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಜೋಗ ಜಲಪಾತ ಸುಂದರ ಪ್ರವಾಸಿತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕಾಮಗಾರಿಯನ್ನು ನಡೆಸಲಾಗುತ್ತಿದೆ ಎಂದರು.
READ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ, ಈಗ ನೀರಿನ ಪ್ರಮಾಣ ಎಷ್ಟಿದೆ?
183 ಕೋಟಿ ರೂ. ಕಾಮಗಾರಿ
183 ಕೋಟಿ ಯೋಜನೆಯ ಕಾಮಗಾರಿ ಚಾಲನೆಯಲ್ಲಿದ್ದು ಸರ್ಕಾರದಿಂದ 30 ಕೋಟಿ ಅನುದಾನ ಬಿಡುಗಡೆಯಾಗಿದ್ದು ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಜೋಗ ಜಲಪಾತದ ವೀಕ್ಷಣೆ ಆಗಮಿಸುವ ಪ್ರವಾಸಿಗರಿಗೆ ಮೂಲಸೌಕರ್ಯಗಳ ಜೊತೆ ಮನೋರಂಜನೆಯನ್ನು ಒದಗಿಸಲು ಹೈದರಾಬಾದ್ ನ ರಾಮೋಜಿ ಫಿಲ್ಮ್ ಸಿಟಿ ಹಾಗೂ ಮುಂಬೈ ಅಧ್ಯಯನ ಪ್ರವಾಸ ನಡೆಸಲಾಗುವುದು ಎಂದರು.
ಕಳೆದ ವರ್ಷ ಬರಗಾಲದ ಛಾಯೆಯಲ್ಲಿ ಡ್ಯಾಂ ಭರ್ತಿಯಾಗಿರಲಿಲ್ಲ. ಈ ಭಾರಿ ಉತ್ತಮ ಮಳೆಯಾಗಿ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. 5 ವರ್ಷಗಳ ನಂತರ ಭರ್ತಿಯಾಗಿದ್ದು 3 ಗೇಟ್ ಗಳ ಮೂಲಕ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆಯಾದರೆ 400ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಲಿದೆ ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದು ಹತ್ತು ಸಾವಿರ ಕ್ಯೂಸೆಕ್ ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದರು.
ಸಾಗರ ತಾಲೂಕಿನಲ್ಲಿ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, 100 ಕ್ಕೂ ಹೆಚ್ಚು ಮನೆಗಳು ಬಿದ್ದಿದೆ ಈಗಾಗಲೇ ಸರ್ಕಾರ ನಿಯಮದ ಪ್ರಕಾರ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಳೆಯಿಂದ ಹಾನಿಯಾದ ಮನೆಗಳಿಗೆ 1.5 ಲಕ್ಷ ರೂ.ಪರಿಹಾರ ನೀಡಲಾಗುತ್ತಿದ್ದು 5 ಲಕ್ಷ ಪರಿಹಾರ ನೀಡಲು ಸಂಪುಟದಲ್ಲಿ ನಿರ್ಧಾರ ಮಾಡಲಾಗುವುದು ಈ ಕುರಿತು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ ಎಂದರು.