ಸುದ್ದಿ ಕಣಜ.ಕಾಂ
ಶಿವಮೊಗ್ಗ: ಜಿಲ್ಲೆಯನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶದಲ್ಲೇ ಉತ್ತಮ ಕ್ರೀಡಾ ಕೇಂದ್ರವಾಗಿ ರೂಪಿಸಲು ಎಲ್ಲ ನೆರವು ಒದಗಿಸಲಾಗುವುದು ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದರು.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಐದು ಕೋಟಿ ರೂ. ವೆಚ್ಚದ ಒಳ ಕ್ರೀಡಾಂಗಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಭಾನುವಾರ ಮಾತನಾಡಿದರು.
ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಉತ್ತಮ ವಾತಾವರಣವಿದೆ. ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರದ ಮುಂದಿಟ್ಟಿರುವ ಎಲ್ಲ ಬೇಡಿಕೆಗಳನ್ನು ಒಂದೊಂದಾಗಿ ಈಡೇರಿಸಲಾಗುತ್ತಿದೆ ಎಂದರು.
ಕರ್ನಾಟಕಕ್ಕೆ ಮೂಲಸೌಕರ್ಯ | ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಮುಂದಿನ ಒಲಿಂಪಿಕ್ಸ್ ನಲ್ಲಿ ಕರ್ನಾಟಕದಿಂದ ಹೆಚ್ಚಿನ ಚಿನ್ನದ ಪದಕದ ನಿರೀಕ್ಷೆ ಹೊಂದಿರುವುದಾಗಿ ಅವರು ಹೇಳಿದರು.
2028ರ ಒಲಿಂಪಿಕ್ಸ್ 10ರೊಳಗೆ ಪದಕ ಪಟ್ಟಿ | 2028ರ ಒಲಂಪಿಕ್ಸ್ ಪದಕ ಪಟ್ಟಿಯಲ್ಲಿ ನಮ್ಮ ದೇಶ 10ರ ಒಳಗೆ ಇರುವುದು ನಮ್ಮ ಗುರಿ. ಮುಂದಿನ ವರ್ಷಗಳಲ್ಲಿ ಭಾರತದಲ್ಲಿ ಒಲಂಪಿಕ್ಸ್ ಆಯೋಜನೆ ಮಾಡುವ ಕುರಿತು ಈಗಾಗಲೇ ಸಿದ್ಧತೆಗಳನ್ನು ವಿವಿಧ ಹಂತಗಳಲ್ಲಿ ಪ್ರಾರಂಭಿಸಲಾಗಿದೆ. ದೇಶದ ಶೇ.70ರಷ್ಟು ಮಂದಿ ಯಾವುದೇ ರೀತಿಯ ದೈಹಿಕ ವ್ಯಾಯಾಮಗಳನ್ನು ನಡೆಸುತ್ತಿಲ್ಲ. ಆರೋಗ್ಯಪೂರ್ಣರಾಗಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಫಿಟ್ ಇಂಡಿಯಾ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿದರು. ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ, ಹೆಚ್ಚುವರಿ ಅಪರ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.