2 ದಿನ ಶಿವಮೊಗ್ಗದಲ್ಲೇ ಇರಲಿದ್ದಾರೆ ಸಿಎಂ ಯಡಿಯೂರಪ್ಪ, ಕಾರ್ಯಕ್ರಮಗಳ ವಿವರ ಇಲ್ಲಿದೆ

 

 

ಸುದ್ದಿ ಕಣಜ.ಕಾಂ
ಶಿವಮೊಗ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಫೆಬ್ರವರಿ 28 ಮತ್ತು ಮಾರ್ಚ್ 1 ರಂದು ಶಿವಮೊಗ್ಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಫೆಬ್ರವರಿ 28ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಗ್ಗೆ 10.55ಕ್ಕೆ ಸೊರಬಕ್ಕೆ ಆಗಮಿಸಲಿದ್ದಾರೆ. ನಂತರ ಬೆಳಗ್ಗೆ 11ಕ್ಕೆ ಆನವಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಸೊರಬ ತಾಲೂಕಿನ ಮೂಗೂರು ಕೆರೆ ತುಂಬಿಸುವ ಯೋಜನೆ ಲೋಕಾರ್ಪಣೆ ಮಾಡುವರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಇದನ್ನೂ ಓದಿ । ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಎಂ ಯಡಿಯೂರಪ್ಪ ಹೆಸರಿಡಲು ಆಗ್ರಹ

ಮಧ್ಯಾಹ್ನ 1.15 ಗಂಟೆಗೆ ಸೊರಬದಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಆಗಮಿಸುವರು. ಸಂಜೆ 5.30ಕ್ಕೆ ನಗರದ ಆಲ್ಕೊಳ ಸರ್ಕಲ್ ಹತ್ತಿರದ ಗೋಪಾಲಗೌಡ ಬಡಾವಣೆಯಲ್ಲಿರು ಮೆಡಿಕಲ್ ಶಾಪ್ ಅಸೋಸಿಯೇಷನ್ಸ್ ಔಷಧ ಭವನ ಉದ್ಘಾಟನೆ ನೆರವೇರಿಸುವರು.

ಸಂಜೆ 6 ಗಂಟೆಗೆ ನಗರದ ಹಳೆಯ ಜೈಲು ಆವರಣದಲ್ಲಿ ಜಿಲ್ಲಾಡಳಿತ ಮತ್ತು ಶಿವಮೊಗ್ಗ ಸ್ಮಾರ್ಟ್ ಸಿಟಿ ಲಿ. ಇವರ ಸಂಯುಕ್ತಾಶ್ರಯದಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಂಡ ಬಹು ಉಪಯುಕ್ತತಾ ಸ್ಥಳದ ಅಭಿವೃದ್ಧಿಯ ಭಾಗಶಃ ಅನುಷ್ಠಾನ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಇದನ್ನೂ ಓದಿ । ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಮೂಕರ್ಜಿಯಷ್ಟೇ ಸಾಲದು, ದೂರಿನೊಂದಿಗೆ ಹೆಸರು, ವಿಳಾಸವೂ ಕಡ್ಡಾಯ

ಸಂಜೆ 6.30ಕ್ಕೆ ಹಳೆಯ ಜೈಲು ಆವರಣದಲ್ಲಿ ಬಿ.ಎಸ್. ಯಡಿಯೂರಪ್ಪನವರ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಿರುವ ಮುಖ್ಯಮಂತ್ರಿಯವರಿಗೆ `ನಮ್ಮೊಲುಮೆ’ ಅಭಿಮಾನದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸುವರು. ಅಂದು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.

ಮಾರ್ಚ್ 1ರಂದು ಬೆಳಗ್ಗೆ 9 ಗಂಟೆಗೆ ನಗರದ ವಿನೋಬನಗರ ಗೆಜ್ಜೆನಹಳ್ಳಿ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.15 ಶಿವಮೊಗ್ಗ ಮಹಾನಗರ ಪಾಲಿಕೆಯ ಹತ್ತಿರ ಎನ್.ಡಿ.ವಿ.ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿ. ಬೆಳಗ್ಗೆ 9.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!